ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಶನಿವಾರ ನಡೆದಿದೆ.

ರಾಜೇಶ್ ಶೆಟ್ಟಿ (38) ಕೊಲೆಗೀಡಾದ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಹಳೇ ಬೊಮ್ಮನಕಟ್ಟೆ ಮುಖ್ಯರಸ್ತೆಯ ಮಾರಮ್ಮನಗುಡಿ ಸಮೀಪದ ಗ್ಯಾರೇಜ್ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಹಳೆಯ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ದಾಳಿಯಿಂದ ರಾಜೇಶ್ ಶೆಟ್ಟಿಯು ಸ್ಥಳದಲ್ಲೇ ಅಸುನೀಗಿದ್ದಾನೆ ಎನ್ನಲಾಗಿದೆ. ರಾಜೇಶ್ ಶೆಟ್ಟಿಯು ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದಾನೆ. ಈತನ ವಿರುದ್ದ ಆರೇಳು ಪ್ರಕರಣಗಳಿವೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿನೋಬನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೌಡಿ ರಾಜೇಶ್ ಶೆಟ್ಟೆ ಹತ್ಯೆ ಮಾಡಿದ್ದ ಆರೋಪಿ ಪತ್ತೆಗೆ ಮೂರು ತಂಡ ರಚಿಸಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.